ಕಾರ್ಕಳ: ಸ್ವಿಫ್ಟ್ ಕಾರು ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ಮಣ್ನ ಕೊಡಿಮಾರು ನಿವಾಸಿ ವಸಂತ ಮೂಲ್ಯ(73) ಎಂಬವರೇ ಮೃತ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಬಂಧಿ ಪ್ರದೀಪ್ ಮೂಲ್ಯ ಎಂಬವರು ದೂರು ನೀಡಿದ್ದಾರೆ.
ವಸಂತ ಮೂಲ್ಯ ಅವರು ಸಂಜೆ ವೇಳೆಗೆ ಬೆಳ್ಮಣ್ನಿಂದ ಕೂಲಿ ಕೆಲಸ ಮುಗಿಸಿ ಮನೆಗೆ ಬರುವ ವೇಳೆ ಮುಲ್ಲಡ್ಕ ಗ್ರಾಮದ ಕೊಡಿಮಾರುವಿನಲ್ಲಿ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ವಸಂತ ಮೂಲ್ಯ ಅವರು ರಸ್ತೆಗೆ ಬಿದ್ದಿದ್ದಾರೆ. ಅವರಿಗೆ ಮುಖ, ಕೈ, ಕಾಲು, ತಲೆಗೆ ಗಂಭೀರ ಪ್ರಮಾಣದಲ್ಲಿ ಗಾಯಗಳಾಗಿವೆ. ತಕ್ಷಣವೇ ಅವರನ್ನು ಕಾರ್ಕಳದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಅಪಘಾತಕ್ಕೆ ಕಾರು ಚಾಲಕನ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ಹೇಳಲಾಗಿದೆ.
ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.











































































